Tiger Kill: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಕಳೇಬರ ಪತ್ತೆ, ತನಿಖೆಗೆ ಆದೇಶ
ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿದೆ. ಹುಲಿಯ ಅರ್ಧ ಕಳೇಬರ ಪತ್ತೆಯಾಗಿದ್ದು, ಕಳ್ಳಬೇಟೆಗಾರರ ಕೈವಾಡದ ಅನುಮಾನ ಸೃಷ್ಟಿಯಾಗಿದೆ.
ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸಿದ್ದಾರೆ. ಅಲ್ಲದೆ 8 ದಿನಗಳಲ್ಲಿ ವರದಿ ಸಲ್ಲಿಸಿ, ಹುಲಿಯ ಹಂತಕರನ್ನು ಪತ್ತೆಮಾಡಲು ಮುಂದಾಗಬೇಕು ಎಂದು ಸಚಿವ ಖಂಡ್ರೆ ಸೂಚಿಸಿದ್ದಾರೆ.
ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಕಳ್ಳಬೇಟೆ ಘಟನೆ ಬಗ್ಗೆ ಸ್ಥಳೀಯರು ಮತ್ತು ಪರಿಸರ ಸಂರಕ್ಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಪರಿಸರ ಇಲಾಖೆ ಮತ್ತು ವನ್ಯಜೀವಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದೇನು?
ಹುಲಿ ಕಳೇಬರ ಸಿಕ್ಕಿದ ವಿಚಾರವಾಗಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅಧಿಕಾರಿಗಳು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಹತ್ತಿರ ಗುರುವಾರ (2ನೇ ಅಕ್ಟೋಬರ್ 2025) ಸಂಜೆ ನಮ್ಮ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಸತ್ತ ಹುಲಿಯ ಅರ್ಧ ಕಳೇಬರವೊಂದು ಮಣ್ಣಿನಲ್ಲಿ ಹುದುಗಿಸಿದ್ದು ಪತ್ತೆಯಾಗಿದೆ. ಹುಲಿಯ ತಲೆ, ಭುಜ ಮುಂದಿನ ಕಾಲುಗಳು ಪತ್ತೆಯಾಗಿದ್ದು ಉಳಿದ ಭಾಗಗಳು ಇನ್ನು ಪತ್ತೆಯಾಗಿಲ್ಲ. ಸಿಕ್ಕಿರುವ ಕಳೇಬರದ ಭಾಗದಲ್ಲಿ ಉಗುರುಗಳು ಮತ್ತು ಹಲ್ಲುಗಳು ಇದ್ದು, ಕಳೇಬರದ ಇನ್ನುಳಿದ ಭಾಗವನ್ನು ಹುಡುಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನು ಕಳ್ಳ ಬೇಟೆಯ ಪ್ರಕರಣವೆಂದೇ ಪರಿಗಣಿಸಿ ತನಿಖೆ ಮಾಡಲಾಗುತ್ತಿದೆ. ಸೀನ್ ಆಫ್ ಕೈಂ (SoCo), ಶ್ವಾನ ತನಿಖಾ ದಳ ಮತ್ತಿತರ ಸಹಾಯದಿಂದ ಅರಣ್ಯ ಇಲಾಖೆ ತಕ್ಷಣವೇ ತನಿಖೆ ಪ್ರಾರಂಭಿಸಿದೆ. ಪ್ರಕರಣಕ್ಕೆ ಕಾರಣ ಮತ್ತು ಕಾರಣಕರ್ತರನ್ನು ಅದಷ್ಟು ಬೇಗೆ ಪತ್ತೆ ಹಚ್ಚಲಾಗುವುದು. ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿಯನ್ನು ನಂತರ ನೀಡಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.