Cabinet: ಅನ್ಯಭಾಗ್ಯ ಯೋಜನೆಯಲ್ಲಿ ಭಾರೀ ಬದಲಾವಣೆ, 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ರಾಜ್ಯ ಸರ್ಕಾರ ಅನ್ನಭಾಗ್ಯ ಫಲಾನುಭವಿಗಳಿಗೆ ಇಂದಿರಾ ಆಹಾರ ಕಿಟ್ ವಿತರಣೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಒಟ್ಟು 10 ಕೆಜಿ ಅಕ್ಕಿ ನೀಡುತ್ತಿದ್ದು, ಇನ್ನುಮುಂದೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ನೀಡಲು ನಿರ್ಣಯ ಮಾಡಲಾಗಿದೆ. ಇಂದಿರಾ ಕಿಟ್ನಲ್ಲಿ 1 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ.
ಈ ಮೊದಲು ಅನ್ನಭಾಗ್ಯ ಯೋಜನೆಯಡಿ ಒಟ್ಟು 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ನಂತರ 5 ಕೆಜಿ ಅಕ್ಕಿ ಜೊತೆಗೆ ಇನ್ನಳಿದ 5ಕೆಜಿ ಅಕ್ಕಿಗೆ ಹಣವನ್ನ ಮನೆಯ ಯಜಮಾನರ ಖಾತೆಗೆ ಹಕಲಾಗುತ್ತಿತ್ತು. ಬಳಿಕ ಐದು ಕೆಜಿ ಅಕ್ಕಿ ಜೊತೆ ಮತ್ತೆ ಐದು ಕೆಜಿ ನೀಡಿ ಒಟ್ಟು ತಲಾ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತಿತ್ತು.
ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಐದು ಕೆಜಿ ಅಕ್ಕಿಯನ್ನು ಕಡಿಮೆ ಮಾಡಿ ಆಹಾರ ಕಿಟ್ನ್ನು ನೀಡಲ ಸರ್ಕಾರ ಮುಂದಾಗಿದೆ. ಐದು ಕೆಜಿ ಅಕ್ಕಿ ಜೊತೆ 1 ಕೆಜಿ ತೊಗರಿಬೇಳೆ, 1 ಕೆಜಿ ಉಪ್ಪು, 1ಕೆಜಿ ಸಕ್ಕರೆ, 1 ಕೆಜಿ ಅಡುಗೆ ಎಣ್ಣೆ, ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ಮಾತನಾಡಿದ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು, ಕುಟುಂಬದಲ್ಲಿ ಒಬ್ಬರು, ಇಬ್ಬರು ಮಾತ್ರ ಇದ್ದರೆ ಅರ್ಧರ್ಧ ಕೆ.ಜಿ ಇರುವ ಕಿಟ್ ನೀಡಲಾಗುತ್ತದೆ. ಕುಟುಂಬದಲ್ಲಿ ಮೂರು ನಾಲ್ಕು ಮಂದಿ ಸದಸ್ಯರು ಇದ್ದರೆ ಒಂದೊಂದು ಕೆ.ಜಿಯ ಕಿಟ್ ನೀಡಲಾಗುತ್ತದೆ. ಐದಕ್ಕಿಂತ ಹೆಚ್ಚು ಮಂದಿ ಸದಸ್ಯರು ಇದ್ದರೆ ಒಂದೂವರೆ ಕೆ.ಜಿ ಇರುವ ಕಿಟ್ ವಿತರಣೆ ಮಾಡಲಾಗುತ್ತದೆ. ಇದರಿಂದ 4,48,62,192 ಫಲಾನುಭವಿಗಳಿಗೆ ಅನುಕೂಲ ಆಗಲಿದೆ ಎಂದು ವಿವರಿಸಿದರು.