Fire accident: ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಬೆಂಕಿ ಅವಘಡ: 7 ಜನರಿಗೆ ಗಾಯ
ದೇಶಾದ್ಯಂತ ದೀಪಾವಳಿ ಹಬ್ಬಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್ನಲ್ಲಿರುವ ಮನೆಯೊಂದರ ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಬೆಂಕಿ ತಗುಲಿ ಏಳು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಮೇಶ್ ಮೇಟಿ ಎಂಬುವವರ ಕಟ್ಟಡದಲ್ಲಿ ಘಟನೆ ನಡೆದಿದೆ. ಇದೇ ಕಟ್ಟಡದಲ್ಲಿ ಬಾಡಿಗೆಗೆ ಇದ್ದ ರಾಜೇಂದ್ರ ತಪಶೆಟ್ಟಿ ಕುಟುಂಬದವರ ಮನೆ ಎದುರು ದೀಪ ಹಚ್ಚಿದ್ದರು. ಆ ದೀಪದ ಬೆಂಕಿ ಮನೆ ಎದುರಿಗೆ ಬಿದ್ದ ಆಯಿಲ್ಗೆ ತಗುಲಿ ಬೆಂಕಿ ಹೊತ್ತಿದೆ. ಅಲ್ಲದೇ ಅಲ್ಲಿ ನಿಲ್ಲಿಸಿದ್ದ ಎರಡು ಬೈಕ್ ಗಳು ಸುಟ್ಟು ಕರಕಲಾಗಿದೆ. ಮನೆಗೂ ಬೆಂಕಿ ಪ್ರವೇಶಿಸಿದೆ. ಅಡುಗೆ ಮನೆಯ ಸಿಲಿಂಡರ್ ಕೂಡ ಸೋರಿ ಮತ್ತಷ್ಟು ಬೆಂಕಿಯ ತೀವ್ರತೆ ಹೆಚ್ಚಾದೆ. ನೋಡನೋಡುತ್ತಿದ್ದಂತೆ ಮನೆ ಸುಟ್ಟು ಕರಕಲಾಗಿದೆ.
ರಾಜೇಂದ್ರ ತಪಶೆಟ್ಟಿ ಬೋರ್ ವೆಲ್ ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆ ಮನೆ ಎದುರು ಬೋರ್ ವೆಲ್ ವಾಹನಗಳ ಆಯಿಲ್, ಗ್ರೀಸ್ ಬಿದ್ದಿತ್ತು. ದೀಪದ ಬೆಂಕಿ ಆಯಿಲ್, ಗ್ರೀಸ್ಗೆ ತಗುಲಿ ನಂತರ ಬೈಕ್ ಮತ್ತು ಮನೆಗೂ ವ್ಯಾಪಿಸಿದೆ. ಈ ವೇಳೆ ಹೊರಗಡೆ ಓಡಿ ಬಂದು ರಾಜೇಂದ್ರ ತಪಶೆಟ್ಟಿ ಕುಟುಂಬ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ.