ಸುಪ್ರೀಂ ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಅಲ್ಲದೆ ಆರೋಪಿಯನ್ನು ಬಂಧಿಸುವಂತೆ ಆಗ್ರಹಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಹೇಳಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಕರೆ ನೀಡಿದ್ದಾರೆ.
ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಘಟನೆ ಹಿನ್ನಲೆ
ರಾಕೇಶ್ ಕಿಶೋರ್ " ಸನಾತನ ಧರ್ಮಕ್ಕೆ ಅವಮಾನ ಆದ್ರೆ ಸಹಿಸೊಲ್ಲ ಎಂದು " ಎಂದು ಘೋಷಣೆಯನ್ನು ಕೂಗುತ್ತಾ ನ್ಯಾಯ ಪೀಠದ ಕಡೆಗೆ ಶೂ ಎಸೆದಿದ್ದರು. ನ್ಯಾಯಾಲಯದಲ್ಲಿ ಹಾಜರಿದ್ದ ಭದ್ರತಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಮುಜುಗರದ ಘಟನೆ ತಪ್ಪಿದೆ. ನ್ಯಾಯಮೂರ್ತಿಗಳಿಗೆ ಎಸೆದಂತ ಶೂ ಅವ್ರಿಗೆ ತಗುಲಲಿಲ್ಲ. ತಕ್ಷಣವೇ ಕಾರ್ಯಪ್ರವೃತ್ತರಾಗಿರೋ ಭದ್ರತಾ ಸಿಬ್ಬಂದಿ ವಕೀಲ ಕಿಶೋರ್ ರಾಕೇಶ್ರನ್ನು ತಡೆದು, ಕೋರ್ಟ್ ಹಾಲ್ನಿಂದ ಹೊರಕ್ಕೆ ಎಳೆದೊಯ್ದಿದ್ದಾರೆ.
ರಾಕೇಶ್ ಆರುಂಡಿ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಆರುಂಡಿ ಗ್ರಾಮದ ಪತ್ರಕರ್ತರು.ಈ ಹಿಂದೆ ದಿಗ್ವಿಜಯ ಸೇರಿದಂತೆ ಇತರ ಸ್ಯಾಟಲೈಟ್ ಮಾಧ್ಯಮಗಳಲ್ಲಿ ಸಿನಿಮಾ, ರಾಜಕೀಯ, ಮೆಟ್ರೋ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದು, ರಾಜಕೀಯ ಕ್ಷೇತ್ರ, ಪ್ರಚಲಿತ ಘಟನೆ, ವಿದ್ಯಾಮಾನಗಳ ಬಗ್ಗೆ ಹಾಗೂ ಹೊಸತನಗಳಿಗೆ ತೆರೆದುಕೊಳ್ಳುವ ವಿಷಯಗಳ ಬಗ್ಗೆ ವರದಿಗಾರಿಕೆ ಮಾಡುವ ಕ್ಷಮತೆ ಹೊಂದಿದ್ದಾರೆ. ಕಳೆದ ಮೂರು ನಾಲ್ಕು ವರ್ಷಗಳಿಂದ ತಮ್ಮದೇ ಅವನಿಯಾನ ಎನ್ನುವ ಡಿಜಿಟಲ್ ಮಾಧ್ಯಮವನ್ನು ಹುಟ್ಟು ಹಾಕಿದ್ದು ಕಳೆದ ಏಳೆಂಟು ತಿಂಗಳಲ್ಲೇ ಅಂದಾಜು 7 ಲಕ್ಷ ಫಾಲ್ಲೋವರ್ಸ್ ಸಂಪಾದಿಸಿದ್ದಾರೆ.