Priyank kharge: ಆರ್ ಎಸ್ ಎಸ್ ನಿರ್ಬಂಧಕ್ಕೆ ಪತ್ರ ಬರೆದಾಗಿನಿಂದ ಬೆದರಿಕೆ ಕರೆ ಬರುತ್ತಿವೆ: ಪ್ರಿಯಾಂಕ್ ಖರ್ಗೆ
ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಚಟುವಟಿಕೆಗೆ ಅನುಮತಿ ನೀಡದಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಅವರಿಗೆ ಬೆದರಿಕೆ ಕರೆ ಬಂದಿದೆ. ಈ ಕುರಿತಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ, ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗಣಿಸುವುದನ್ನು ನಿಲ್ಲಿಸಿಲ್ಲ ಎಂದಿದ್ದಾರೆ.
ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೆಟ್ಟ ನಿಂದನೆಗಳಿಂದ ತುಂಬಿಹೋಗಿವೆ. ಆದರೆ,. ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ಆಶ್ಚರ್ಯಪಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಮಹಾತ್ಮ ಗಾಂಧಿ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದ ಆರ್ಎಸ್ಎಸ್, ನನ್ನನ್ನು ಏಕೆ ಬಿಡುತ್ತಾರೆ? ಬೆದರಿಕೆಗಳು ಮತ್ತು ವೈಯಕ್ತಿಕ ನಿಂದನೆಗಳು ನನ್ನನ್ನು ಮೌನಗೊಳಿಸುತ್ತವೆ ಎಂದು ಅವರು ಭಾವಿಸಿದರೆ, ಅದು ಅವರ ತಪ್ಪು ಭಾವನೆ. ಇದು ಕೇವಲ ಆರಂಭವಷ್ಟೇ ಎಂದು ಹೇಳಿದ್ದಾರೆ.
ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬ್ ಅವರ ತತ್ವಗಳ ಮೇಲೆ ಸ್ಥಾಪಿತವಾದ ಸಮಾಜವನ್ನು ನಿರ್ಮಿಸಲು ಇದು ಸೂಕ್ತ ಸಮಯ. ಸಮಾನತೆ, ವಿವೇಚನೆ ಮತ್ತು ಕರುಣೆಯಲ್ಲಿ ಬೇರೂರಿರುವ ಸಮಾಜ ಕಟ್ಟಬೇಕಿದೆ. ಈ ದೇಶವನ್ನು ಅತ್ಯಂತ ಅಪಾಯಕಾರಿ ವೈರಸ್ಗಳಿಂದ ಶುದ್ಧೀಕರಿಸಬೇಕಿದೆ ಎಂದು ತಿಳಿಸಿದ್ದಾರೆ.